ಕರ್ನಾಟಕದಲ್ಲಿ ಬಿಜೆಪಿ ಅಲೆಗೆ ಕಾಂಗ್ರೆಸ್ ಸಂಪೂರ್ಣ ಬೆದರಿದೆ: ಅಮಿತ್ ಶಾ
ನ್ಯೂಸ್ ಕನ್ನಡ ವರದಿ-(13.04.18): ಕರ್ನಾಟಕದ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದೆ. ಈಗಾಗಲೇ ಪ್ರಚಾರ ಕಾರ್ಯಗಳು ಮತ್ತಷ್ಟು ಚುರುಕುಗೊಂಡಿದೆ. ರಾಷ್ಟ್ರೀಯ ನಾಯಕರುಗಳೆಲ್ಲಾ ಕರ್ನಾಟಕದಲ್ಲೇ ಠಿಕಾಣಿ ಹೂಡಿದ್ದಾರೆ. ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಇಂದು ಕರ್ನಾಟಕದ ಬೆಳಗಾವಿಯಲ್ಲಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಬಿಜೆಪಿ ಪರವಾದ ಅಲೆಯಿದ್ದು, ಈ ಅಲೆಗೆ ಕಾಂಗ್ರೆಸ್ ಸಂಪೂರ್ಣವಾಗಿ ಬೆದರಿದೆ ಎಂದು ಅವರು ಹೇಳಿದ್ದಾರೆ.
ಈ ಬಾರಿ ಚುನಾವಣಾ ಪ್ರಚಾರ ಚುರುಕಾಗಿ ನಡೆದಿದೆ. ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧವಾದ ಅಲೆ ಇದೆ. ಇದರಿಂದಾಗಿ ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಬಿಜೆಪಿಯ ಅಲೆಗೆ ಸಿಎಂ ಬೆದರಿದ್ದಾರೆ ಎಂದು ಅಮಿತ್ ಶಾ ಹೇಳಿದರು. ಸ್ಪಷ್ಟ ಬಹುಮತದಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಯಡಿಯೂರಪ್ಪ ನೇತೃತ್ವದಲ್ಲಿ ಉತ್ತಮ ಆಡಳಿತ ನೀಡುತ್ತೇವೆ ಎಂದರು.